World Mental Health Day

ಮಾನಸಿಕಆರೋಗ್ಯಪ್ರತಿಯೊಬ್ಬರ ಹಕ್ಕು: ಡಾ.ಲಿಂಗರಾಜು
ಕೊಪ್ಪಳ ಅಕ್ಟೋಬರ್ 10 (ಕರ್ನಾಟಕ ವಾರ್ತೆ): ಮಾನಸಿಕ ಆರೋಗ್ಯ ಪ್ರತಿಯೊಬ್ಬರ ಹಕ್ಕಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಲಿಂಗರಾಜು ಟಿ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ” ಪ್ರಯುಕ್ತ ನಗರದ ನೌಕಕರ ಭವನದಲ್ಲಿ ಅಕ್ಟೋಬರ್ 10ರಂದು ಹಮ್ಮಿಕೊಂಡಿದ್ದ ಮಾನಸಿಕ ಆರೋಗ್ಯ ಕುರಿತ ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮನುಷ್ಯನಿಗೆ ದೈಹಿಕ ಆರೋಗ್ಯ ಎಷ್ಟು ಮುಖ್ಯವೋ ಮಾನಸಿಕ ಆರೋಗ್ಯ ಕೂಡ ಅಷ್ಟೇ ಮುಖ್ಯ. ಎರಡನ್ನು ಸಮತೋಲನವಾಗಿ ಕಾಪಾಡಿಕೊಂಡು ಹೋಗಬೇಕು. ಮೆದಳುನಲ್ಲಿರುವ ರಾಸಾಯನಿಕ ಬದಲಾವಣೆ, ಮಾದಕ ವಸ್ತುಗಳಾದ ಗಾಂಜಾ, ಅಫೀಮ್ ಹಾಗೂ ಆಲ್ಕೋಹಾಲು ಸೇವನೆ ಮತ್ತು ಮೆದುಳಿಗೆ ಸಂಬಂಧಿಸಿದ ಸೋಂಕು, ಗಡ್ಡೆ, ಪೆಟ್ಟು, ಕುಟುಂಬ, ಹಣಕಾಸು, ಉದ್ಯೋಗ, ರೀತಿ ನೀತಿಗಳ ಗೊಂದಲಗಳು ಮಾನಸಿಕ ರೋಗಕ್ಕೆ ಮುಖ್ಯ ಕಾರಣ. ಮಾನಸಿಕ ಖಾಯಿಲೆ ಬಗ್ಗೆ ಯಾರು ಕೂಡ ನಿರ್ಲಕ್ಷ್ಯ ಮಾಡಬಾರದು. ಮೊದನೇ ಹಂತದಲ್ಲಿ ಪತ್ತೆ ಹಚ್ಚಿ ಚಿಕಿತ್ಸೆ ಪಡೆದು ಆರೋಗ್ಯವಂತರಾಗಿ ಬಾಳಬೇಕು ಎಂದು ಹೇಳಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ರವೀಂದ್ರನಾಥ್ ಎಂ.ಎಚ್ ಅವರು ಮಾನಸಿಕ ಖಾಯಿಲೆಯ ವಿಧಗಳು, ಚಿಕಿತ್ಸಾ ಸೇವಾ ಸೌಲಭ್ಯಗಳ ಕುರಿತು ಮಾತನಾಡಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ.ಪ್ರಕಾಶ ಹೆಚ್ ಅವರು ಪ್ರಾಸ್ತಾವಿಕ ಮಾತನಾಡಿ, ಪ್ರತಿ ವರ್ಷ ಅಕ್ಟೋಬರ್ 10 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತದೆ. ‘ಮಾನಸಿಕ ಆರೋಗ್ಯವು ಸಾರ್ವತ್ರಿಕ ಮಾನವ ಹಕ್ಕು’ ಎಂಬುವುದು ಈ ವರ್ಷದ ಘೋಷವಾಕ್ಯವಾಗಿದೆ ಎಂದು ತಿಳಿಸಿದರು.
ಗಂಗಾವತಿ ಉಪ ವಿಭಾಗ ಆಸ್ಪತ್ರೆಯ ಮನೋವೈದ್ಯರಾದ ಡಾ.ವಾದಿರಾಜ ಗೋರೆಬಾಳ ಅವರು ವಿಶೇಷ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ನಂದಕುಮಾರ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿಗಳಾದ ಶ್ರೀದೇವಿ ಎಸ್.ಎನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ಪೂಜಾರ ಕಾರ್ಯಕ್ರಮ ನಿರೂಪಿಸಿದರು. ಮನೋಶಾಸ್ತ್ರಜ್ಞರಾದ ಪುಷ್ಪಾ ತೆರೆಸಾ ಅವರು ಸ್ವಾಗತಿಸಿದರು. ವಿಕಲಚೇತನರ ಗ್ರಾಮೀಣ ಮತ್ತು ನಗರ ಪುನರ್ ವಸತಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.