Breaking News

ಜಿಲ್ಲಾ, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

IMG 20240716 WA0320 300x200

ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಜಿ.ಪಂ. ಸಿ.ಇ.ಓ.ರಾಹುಲ್ ಶಿಂಧೆ ಸೂಚನೆ

ಜಾಹೀರಾತು

ಬೆಳಗಾವಿ, ಜುಲೈ 16 (ಕರ್ನಾಟಕ ವಾರ್ತೆ): ತಾಲೂಕು ಮಟ್ಟದ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದರ ಮೂಲಕ ಸಾರ್ವಜನಿಕರ ಸಮಸ್ಯೆಗಳ ತ್ವರಿತ ಪರಿಹಾಕ್ಕೆ ಮುಂದಾಗಬೇಕು. ತಾಲೂಕುಗಳ ಅಭಿವೃದ್ಧಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳ ಪಾತ್ರ ಮಹತ್ವದಾಗಿದ್ದು, ತಮ್ಮ ಜವಾಬ್ದಾರಿ ಅರಿತು ಸಮರ್ಪಕವಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ (ಜು.16) ಜರುಗಿದ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ತಾಲೂಕು ವ್ಯಾಪ್ತಿಯಲ್ಲಿ ನಿಯಮಿತವಾಗಿ ಸಂಚರಿಸಿ ತಮ್ಮ ಇಲಾಖೆಗಳಿಂದ ಜರುಗುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಕಾಮಗಾರಿಗಳನ್ನು ಕಾಲಮಿತಿಯೊಳಗಾಗಿ ಪೂರ್ಣಗೊಳಿಸುವಂತೆ ಕ್ರಮ ವಹಿಸುವದರ ಜೊತೆಗೆ ತಾಲೂಕುಗಳ ಅಭಿವೃದ್ಧಿಗೆ ಮುಂದಾಗುಂತೆ ತಿಳಿಸಿದರು.

ಈಗಾಗಲೇ ಪ್ರತಿ ತಾಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿಲಾಗಿದ್ದು, ಆಯಾ ನೋಡಲ್ ಅಧಿಕಾರಿಗಳು ಪ್ರತಿ ಮಾಹೆ ತಪ್ಪದೇ ತಾಲೂಕುಗಳಿಗೆ ಭೇಟಿ ನೀಡಿ ನಿಯಮಿತವಾಗಿ ಸಭೆ ಜರುಗಿಸಿ ವರದಿ ಸಲ್ಲಿಸಬೇಕು. ಮುಖ್ಯಮಂತ್ರಿಗಳ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ದೂರುಗಳನ್ನು ಆಯಾ ಇಲಾಖಾ ಅಧಿಕಾರಿಗಳು ಕೂಡಲೆ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು.

ವಿವಿಧ ಇಲಾಖೆಗಳ ವಸತಿ ನಿಲಯಗಳಲ್ಲಿನ ವಿಧ್ಯಾರ್ಥಿಗಳಿಗೆ ಪಾವತಿಸಬೇಕಾದಂತಹ ವಿಧ್ಯಾರ್ಥಿ ವೇತನ ಪಾವತಿಗೆ ಕೂಡಲೆ ಕ್ರಮವಹಿಸಬೇಕು. ವಿಧ್ಯಾರ್ಥಿಗಳ ಆಧಾರ ಸೀಡಿಂಗ್ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಿ. ಹದಿನೈದು ದಿನದೊಳಗಾಗಿ ಬಾಕಿ ಇರುವ ವಿದ್ಯಾರ್ಥಿ ವೇತನ ಪಾವತಿಗೆ ಕ್ರಮ ವಹಿಸಬೇಕು.

ವಸತಿ ನಿಲಯಗಳ ಪ್ರವೇಶಾತಿಯಲ್ಲಿ ಯಾವುದೇ ಗೊಂದಲಗಳಾಗದಂತೆ ನಿಗಾವಹಿಸಬೇಕು. ಜಿಲ್ಲೆಯ ಎಲ್ಲ ವಸತಿ ನಿಲಯಗಳ ವಾರ್ಡನಗಳ ಸಭೆ ಜರುಗಿಸಿ ಕಾಲಮಿತಿಯೊಳಗಾಗಿ ಪ್ರವೇಶಾತಿ ಕುರಿತು ಸ್ವೀಕೃತವಾದಂತಹ ಅರ್ಜಿಗಳನ್ನು ಆನ್ ಲೈನ್ ನಲ್ಲಿ ದಾಖಲಿಸಬೇಕು. ವಸತಿ ನಿಲಯಗಳಲ್ಲಿನ ಸೌಕರ್ಯಗಳ ಕುರಿತು ಸಂಬಂಧಿಸಿದ ನೋಡಲ್ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸಬೇಕು.

ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಹೊಸದಾಗಿ ಮಂಜೂರಾಗಿರುವ ವಸತಿ ನಿಲಯಗಳ ಪ್ರಾರಂಭಕ್ಕೆ ಸ್ವಂತ ಕಟ್ಟಡ ಇಲ್ಲದೇ ಇರುವ ಪಕ್ಷದಲ್ಲಿ ಬಾಡಿಗೆ ಕಟ್ಟಡವನ್ನು ಪಡೆದು ಪ್ರಾರಂಭಿಸಲು ಕ್ರಮ ಜರುಗಿಸಬೇಕು. ಈಗಾಗಲೇ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳ ಬಾಡಿಗೆಯನ್ನು ಆಯಾ ತಿಂಗಳಿನಲ್ಲಿ ಪಾವತಿಗೆ ಕ್ರಮ ವಹಿಸಬೇಕು. ಎಲ್ಲ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಆಗಬೇಕು ಈ ಕುರಿತು ಸಂಬಂಧಿಸಿದ ನೋಡಲ್ ಅಧಿಕಾರಿಗಳು ಗಮನ ಹರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ನಿರ್ದೇಶನ ನೀಡಿದರು.

ಕುಡಿಯುವ ನೀರು ಪರೀಕ್ಷೆಗೆ ನಿರ್ದೇಶನ:

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಬರಾಜು ಮಾಡಲಾಗುತ್ತಿರುವ ಕುಡಿಯುವ ನೀರಿನ ಪರೀಕ್ಷೆಗಳನ್ನು ನಿಯಮಿತವಾಗಿ ಜರುಗಿಸಬೇಕು. ಕುಡಿಯುವ ನೀರು ಸರಬರಾಜುಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾ ಮಟ್ಟದ ಟಾಸ್ಕ ಪೋರ್ಸ ಸಮಿತಿ ರಚಿಸಲಾಗಿದ್ದು, ತಾಲೂಕು ಮಟ್ಟದಲ್ಲಿ ಕೂಡ ಸಮಿತಿಗಳನ್ನು ರಚಿಸಿ ನೀರು ಪರೀಕ್ಷೆ, ತೆಗೆದುಕೊಂಡ ಕ್ರಮಗಳ ಕುರಿತು ಸಮಗ್ರ ವರದಿ ನೀಡಬೇಕು ಎಂದು ಶಿಂಧೆ ಹೇಳಿದರು.

ನೀರು ಪರೀಕ್ಷೆ ನಂತರ ನೀರು ಕುಡಿಯಲು ಯೋಗ್ಯವಿಲ್ಲದಿದ್ದರೆ ಅಂತಹ ನೀರಿನ ಮೂಲಗಳ ಹತ್ತಿರ ಕೆಂಪು ಅಕ್ಷರಗಳಲ್ಲಿ ಸೂಚನಾ ಫಲಕವನ್ನು ಅಳವಡಿಸಬೇಕು. ಈ ಕಾರ್ಯದಲ್ಲಿ ಆರೋಗ್ಯ ಇಲಾಖೆ, ತಾಲೂಕು ಪಂಚಾಯ ಹಾಗೂ ಗ್ರಾಮ ಪಂಚಾಯತಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು.

ಮೇಲ್ಮಟ್ಟದ ಜಲಸಂಗ್ರಹಾಗಾರಗಳ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕು. ನೀರಿನ ಮೂಲಗಳ ಮೂಲಕ ನೇರವಾಗಿ ಪೂರೈಕೆ ಆಗುವ ನೀರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಿ ಕುಡಿಯಲು ಯೋಗ್ಯವಿದ್ದಲ್ಲಿ ಮಾತ್ರ ಅಂತಹ ನೀರನ್ನು ಪೂರೈಸಬೇಕು ಕಲುಷಿತ ನೀರು ಪೂರೈಕೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವದು ಎಂದು ಎಚ್ಚರಿಕೆ ನೀಡಿದರು.

ಅಂಗನವಾಡಿ ಕೇಂದ್ರಗಳ ಸ್ಥಳಾಂತರಕ್ಕೆ ಸೂಚನೆ:

ಶಿಥಿಲಾವಸ್ಥೆಯಲ್ಲಿರುವಂತಹ ಅಂಗನವಾಡಿ ಕಟ್ಟಡಗಳಲ್ಲಿ ಯಾವುದೇ ಕಾರಣಕ್ಕೂ ತರಗತಿಗಳನ್ನು ನಡೆಸಬಾರದು. ಅಂಗನವಾಡಿಗಳು ಖಾಸಗಿ ಒಡೆತನದ ಕಟ್ಟಡಗಳಲ್ಲಿ ನಡೆಯುತ್ತಿದ್ದರೆ ಅಂತಹ ಅಂಗನವಾಡಿ ಕೇಂದ್ರಗಳನ್ನು ಸರಕಾರಿ ಕಟ್ಟಡಗಳಿಗೆ ಸ್ಥಳಾಂತರಿಸಬೇಕು ಎಂದು ರಾಹುಲ್ ಶಿಂಧೆ ಅವರು ಅಧಿಕಾರಿಗಳಿಗೆ ತಿಳಿಸಿದರು.
ಸರಕಾರಿ ಶಾಲೆಯಲ್ಲಿ ಸುಸಜ್ಜಿತ ಕೋಣೆ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿ ಸ್ಥಳಾಂತರಿಸಲು ಪ್ರಥಮಾದ್ಯತೆ ನೀಡಬೇಕು. ಯಾವುದೇ ಶಾಲೆಗಳಲ್ಲಿ ಸ್ಥಳಾವಕಾಶ ಇದ್ದರೂ ಸಹ ಅಂಗನವಾಡಿ ಕೇಂದ್ರ ಪ್ರಾರಂಭಕ್ಕೆ ಸ್ಥಳಾವಕಾಶ ನೀಡಲು ನಿರಾಕರಿಸುವ ಮುಖ್ಯೋಪಾಧ್ಯಯರ ವಿರುದ್ಧ ಕ್ರಮ ಜರುಗಿಸಲಾಗುವದು ಎಂದು ಎಚ್ಚರಿಕೆ ನೀಡಿದರು.

ಪ್ರತಿ ತಿಂಗಳ ಮೂರನೇ ಶನಿವಾರದಂದು ಎಲ್ಲ ತಾಲೂಕು ಮಟ್ಟದಲ್ಲಿ ಸಭೆ ಜರುಗಿಸಿ ನೋಡೆಲ್ಲ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಭೆಟಿ ನೀಡಿ ಪಾಲಕರ ಸಭೆಯ ಕುರಿತು ವರದಿ ಸಲ್ಲಿಸಬೇಕು. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳ ಸುತ್ತಮುತ್ತಲಿನ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು ಅಲ್ಲದೇ ಕೇಂದ್ರದ ಹತ್ತಿರ ಸಿ.ಸಿ. ರಸ್ತೆ ಹಾಗೂ ಚರಂಡಿಗಳ ನಿರ್ಮಾಣಕ್ಕೆ ಕ್ರಿಯಾ ಯೋಜನೆ ಸಲ್ಲಿಸಲು ಸೂಚಿಸಿದರು.

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ:

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ನಿಯಂಯ್ರಣಕ್ಕೆ ಅಗತ್ಯದ ಎಲ್ಲ ಕ್ರಮಗಳನ್ನು ಜರುಗಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ತಾಲೂಕು ಪಂಚಾಯತ ಹಾಗೂ ಇತರ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆಯ ಜೊತೆಗೆ ತಾಲೂಕು ಪಂಚಾಯತಗಳು ಕ್ರಮ ವಹಿಸಬೇಕು. ಆಯುಷ್ಮಾನ ಮಂದಿರ ಹಾಗೂ ನಮ್ಮ ಕ್ಲಿನಿಕ್ ನಿರ್ಮಾಣಕ್ಕೆ ಬೇಕಾದಂತಹ ನಿವೇಶನವನ್ನು ಆದಷ್ಟು ಶೀಘ್ರವೇ ಗುರುತಿಸಲು ಸೂಚಿಸಿದರು.

ಶಾಲಾ ಕಟ್ಟಡಗಳ ದುರಸ್ತಿ ಪೂರ್ಣಗೊಳಿಸಲು ಸೂಚನೆ:

ಜಿಲ್ಲೆಯಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ಶಾಲಾ ಕಟ್ಟಡಗಳ ನಿರ್ಮಾಣ ಹಾಗೂ ದುರಸ್ತಿ ಕಾರ್ಯಗಳು ಬರುವ ಅಕ್ಟೊಬರ್ ಮಾಹೆಯೊಳಗಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಏಜೆನ್ಸಿಗಳಿಗೆ ರಾಹುಲ್ ಶಿಂಧೆ ಸೂಚನೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ತಾ.ಪಂ.ಕಾರ್ಯ ನಿರ್ವಾಹಕ ಅಧಿಕಾರಿಗಳು ನಿಯಮಿತವಾಗಿ ಭೆಟಿ ನೀಡಿ ಶೀಘ್ರವೆ ಕಾಮಗಾರಿಗಳು ಪೂರ್ಣಗೊಳ್ಳುವಂತೆ ನಿಗಾವಹಿಸಬೇಕು. ನರೇಗಾ ಯೋಜನೆಯಡಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಕ್ರಮ ಜರುಗಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತತ್ ಉಪಕಾರ್ಯದರ್ಶಿಗಳಾದ ಬಸವರಾಜ ಅಡವಿಮಠ, ಬಸವರಾಜ ಹೆಗ್ಗನಾಯಕ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಿವಪ್ರಿಯಾ ಕಡೆಚೂರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ ಹಂಚಾಟೆ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಬ್ದುಲ ರಶೀದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಹೇಶ ಕೋಣಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.