Breaking News

ಅವಕಾಶ ವಂಚಿತರ ಯೋಜನೆಗಳಅನುಷ್ಠಾನದಬದ್ಧತೆಹೊಂದಲುಅಧಿಕಾರಿಗಳಿಗೆ ಎಸ್ಸಿ ಎಸ್ಟಿ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ ಸಲಹೆ

SC ST Welfare Committee Chairman P.M. Narendraswamy advice

IMG 20240926 WA0448 1024x461

ಕೊಪ್ಪಳ ಸೆ.26 (ಕ.ವಾ.) ನಮ್ಮ ಸಮಾಜದಲ್ಲಿನ ನಿರ್ಗತಿಕರಿಗೆ ನ್ಯಾಯ ಕೊಡಿಸುವ ವಿಷಯದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಯಾರಿಗೆ ನ್ಯಾಯ ಒದಗಿಸಬೇಕು ಎನ್ನುವ ವಿಚಾರದಲ್ಲಿ ಸರಿಯಾದ ವಿವೇಚನೆಯನ್ನು ಬಳಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ
ಅವರು ಹೇಳಿದರು.
ವಿಧಾನಸಭಾ ಸದಸ್ಯರು ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸದಸ್ಯರಾದ ಐಹೊಳೆ ದುರ್ಯೋಧನ, ಬಸನಗೌಡ ದದ್ದಲ, ಬಸವರಾಜ್ ಮತ್ತಿಮೂಡ್, ಶ್ರೀಮತಿ ಕರೆಮ್ಮ, ಶಾಂತರಾಮ್ ಬುಡ್ನ ಸಿದ್ದಿ, ಜಗದೇವ್ ಗುತ್ತೇದಾರ್ ಮತ್ತು ಕೃಷ್ಣ ನಾಯಕ ಅವರ ಸಮ್ಮುಖದಲ್ಲಿ ರಾಯಚೂರು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಕೊಪ್ಪಳ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಮ್ಮ ಸಮಾಜದಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಹೆಚ್ಚಿನ ಸಂಖ್ಯೆಯ ಜನತೆಗೆ ಅಕ್ಷರಗಳ ಪರಿಚಯವೇ ಇಲ್ಲ. ಈ ಕಾರಣದಿಂದಾಗಿ ಬಹುತೇಕ ಎಸ್ಸಿ ಮತ್ತು ಎಸ್ಟಿ ಜನತೆಗೆ ಕಾನೂನುಗಳ ಬಗ್ಗೆ ಜ್ಞಾನವಿಲ್ಲ; ಸಂವಿಧಾನದ ಬಗ್ಗೆ ತಿಳಿಯಲು ಅವರಿಗೆ ಸಾಧ್ಯವಾಗಿಲ್ಲ ಎಂಬುದರ ಬಗ್ಗೆ ಅಧಿಕಾರಿಗಳು ಮೊದಲು ಅರಿಯಬೇಕು. ಅವಕಾಶಗಳು ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಸಮಾನವಾಗಿ ಸಿಗಬೇಕು. ಶತಶತಮಾನಗಳಿಂದ ದೌರ್ಜನ್ಯಕ್ಕೊಳಗಾದ, ತುಳಿತಕ್ಕೊಳಗಾದ ಜನರಿಗೆ ಸಮರ್ಪಕವಾದ ಸೌಕರ್ಯ ನೀಡಿ ಅವರನ್ನು ಸಹ ಮುಖ್ಯವಾಹಿನಿಗೆ ಕರೆ ತರುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಚಿಂತನೆ ನಡೆಸಿ, ಸಮಾಜಮುಖಿ ಕಾರ್ಯದಲ್ಲಿ ತೊಡಗುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.
ಸಮಾಜದಲ್ಲಿ ಇನ್ನು ಸಹ ಸಾಕಷ್ಟು ಜನ ಅವಕಾಶಗಳಿಂದ ವಂಚಿತರಾಗಿದ್ದು ಅವರಿಗೆ ಸಮಾನವಕಾಶಗಳನ್ನು ಕಲ್ಪಿಸಬೇಕಿದೆ. ದಿನೇದಿನೆ ಜನಸಂಖ್ಯೆ ವಿಪರೀತ ಏರುತ್ತಿದ್ದು, ಹಾಗೊಂದು ವೇಳೆ ಈ ಸಾಮಾಜಿಕ ವ್ಯವಸ್ಥೆಯಲ್ಲಿ ವ್ಯತ್ಯಾಸ ಉಂಟಾದಲ್ಲಿ ದೇಶಕ್ಕೆ ಉಳಿಗಾಲವಿಲ್ಲ ಎನ್ನುವ ಕಟುವಾಸ್ತವನ್ನು ಪ್ರತಿಯೊಬ್ಬರು ಅರಿಯಬೇಕು. ಸಂವಿಧಾನದ ಮೇಲೆ ನಮ್ಮ ದೇಶ ನಡೆಯುತ್ತಿದೆ. ಸಂವಿಧಾನವು ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕನ್ನು ನೀಡಿದೆ. ಅಂತಹ ಸಂವಿಧಾನ ಬದ್ಧ ಹಕ್ಕಿನಿಂದಾಗಿಯೇ ನಾನಾ ಯೋಜನೆಗಳನ್ನು ತುಳಿತಕ್ಕೊಳಗಾದ ಜನರ ಏಳ್ಗೆಗಾಗಿ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದ್ದು ಈ ಕಾರ್ಯ ನಿರಂತರವಾಗಿ ಮುಂದುವರೆಯಬೇಕು. ಎಸ್ಸಿ ಎಸ್ಟಿ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಶಿಸ್ತುಬದ್ಧವಾದ ಯೋಜನೆಗಳನ್ನು ರೂಪಿಸಿ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ಮಾಡಿದರು.
ಪ್ರಜ್ಞಾವಂತಿಕೆಯಿAದ ಕಾರ್ಯನಿರ್ವಹಿಸಿ : ರಾಜ್ಯದಲ್ಲಿಯೇ ಕೊಪ್ಪಳ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳನ್ನೊಳಗೊಂಡ ಕಲ್ಯಾಣ ಕರ್ನಾಟಕ ಭಾಗವು ಸಾಕಷ್ಟು ಹಿಂದುಳಿದೆ. ಈ ಭಾಗದಲ್ಲಿ ಕೆಲಸ ಮಾಡುವ ಅಧಿಕಾರಿಗಳು ಜಿಲ್ಲೆಯಲ್ಲಿನ ಸಾಮಾಜಿಕ ಸ್ಥಿತಿಗತಿಯ ಬಗ್ಗೆ ತಿಳಿದುಕೊಳ್ಳಬೇಕು. ದೌರ್ಜನ್ಯಕ್ಕೊಳಗಾದ ಜನರ ಬಗ್ಗೆ ಅಂತಃಕರಣ ಭಾವನೆ ಹೊಂದಬೇಕು. ಜನ ಸಮುದಾಯಗಳ ಮಧ್ಯೆ ಸಾಮಾಜಿಕ ಅಂತರವನ್ನು ತಗ್ಗಿಸುವ ಕಾರ್ಯಕ್ಕೆ ನಾನು ಬದ್ಧನಾಗಿರುತ್ತೇನೆಂದು ಸಂಕಲ್ಪ ಹೊಂದಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಈ ಮೂಲಕ ಈ ದೇಶಕ್ಕೆ ತಮ್ಮದೇ ಕೊಡುಗೆ ನೀಡಬೇಕು ಎಂದು ನರೇಂದ್ರಸ್ವಾಮಿ ಅವರು ಅಧಿಕಾರಿಗಳಿಗೆ ಸಲಹೆ ಮಾಡಿದರು.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಲಿ : ಸಮಾಜದಲ್ಲಿನ ಅವಕಾಶ ವಂಚಿತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗದಿದ್ದಲ್ಲಿ ಅವರಿಗೆ ನಾಳೆ ಉದ್ಯೋಗ ಸಿಗುವುದಿಲ್ಲ ; ಅವರು ಬದುಕು ನಡೆಸುವುದು ದುಸ್ಥರವಾಗುತ್ತದೆ. ಸಮಾಜದಲ್ಲಿ ಇದೆ ರೀತಿಯ ಅಸಮತೋಲನ ಮುಂದುವರೆದರೆ ಗಂಡಾAತರ ಎದುರಾಗುತ್ತದೆ. ಧಂಗೆಗಳು ಘಟಿಸುತ್ತವೆ ಎಂಬುದರ ಬಗ್ಗೆ ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅರಿತು, ಸಮಾಜದಲ್ಲಿನ ಅವಕಾಶ ವಂಚಿತ ಎಸ್ಸಿ ಮತ್ತು ಎಸ್ಟಿ ಮಕ್ಕಳಿಗೆ ವಿಶೇಷವಾಗಿ ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳು ಮತ್ತು ವಸತಿ ನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣ ದೊರಕುವ ಹಾಗೆ ಯೋಜನೆಗಳ ಅನುಷ್ಠಾನಕ್ಕೆ ಮುತುವರ್ಜಿ ವಹಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ಮಾಡಿದರು. ಕಾಲಕಾಲಕ್ಕೆ ವಸತಿ ನಿಲಯಗಳಿಗೆ, ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ವ್ಯವಸ್ಥೆಯ ಬಗ್ಗೆ ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜವಾಬ್ದಾರಿಯನ್ನು ಜ್ಞಾಪಿಸಿ: ಆಯಾ ಇಲಾಖೆಗಳ ಅಧಿಕಾರಿಗಳು ನಿರಂತರವಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಂರ್ಪರ್ಕದಲ್ಲಿದ್ದು ಅವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸಬೇಕು. ಆಯಾ ಯೋಜನೆಗಳ ಮಹತ್ವ ತಿಳಿಸಿ, ಅಧಿಕಾರಿಗಳಿಗೆ ಅವರ ಜವಾಬ್ದಾರಿಯನ್ನು ಜ್ಞಾಪಿಸಬೇಕು ಎಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧ್ಯಕ್ಷರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಸೇರಿದಂತೆ ನಾನಾ ಇಲಾಖೆಗಳ ಬಗ್ಗೆ ಅಧ್ಯಕ್ಷರು ಮತ್ತು ಸದಸ್ಯರು ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ಧಿ, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮ ಹಾನಗಲ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

About Mallikarjun

Check Also

screenshot 2025 12 08 17 40 00 68 680d03679600f7af0b4c700c6b270fe7.jpg

ಭಾಗ್ಯನಗರ: ಪ್ರಾಣಿ ಆರೈಕೆ ಕೇಂದ್ರದಲ್ಲಿನ ನಾಯಿಗಳನ್ನು ದತ್ತು ಪಡೆಯಲು ಅವಕಾಶ

ಭಾಗ್ಯನಗರ: ಪ್ರಾಣಿ ಆರೈಕೆ ಕೇಂದ್ರದಲ್ಲಿನ ನಾಯಿಗಳನ್ನು ದತ್ತು ಪಡೆಯಲು ಅವಕಾಶ Bhagyanagar: Dogs at animal care center available …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.