Breaking News

ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ನಿಧನ

Former Chief Minister SM Krishna passed away

ಜಾಹೀರಾತು

ಬೆಂಗಳೂರು : ಕರ್ನಾಟಕ ರಾಜಕೀಯದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಮಂಗಳವಾರ ಮುಂಜಾನೆ ನಿಧನರಾದರು.

92 ವರ್ಷದ ಎಸ್ ಎಸ್ ಎಂ ಕೃಷ್ಣ ಅವರು ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.

ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಜನಿಸಿದ ಕೃಷ್ಣ 60 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ವಿಧಾನಸಭೆ, ಲೋಕಸಭೆ, ರಾಜ್ಯಸಭೆ ಸದಸ್ಯರಾಗಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸ್ಪೀಕರ್, ಕೇಂದ್ರ ಸಚಿವರಾಗಿ ಮತ್ತು ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.

ಎಸ್​ಎಂ ಕೃಷ್ಣ ಅವರು ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. ಡಿಸೆಂಬರ್ 1989 ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1971 ರಿಂದ 2014 ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. 1999 ರಿಂದ 2004ರವರೆಗೆ ಕರ್ನಾಟಕದ 16 ನೇ ಸಿಎಂ ಆಗಿದ್ದರು. ಬಳಿಕ 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19ನೇ ರಾಜ್ಯದ ಮಾಜಿ ರಾಜ್ಯಪಾಲರಾಗಿ ಮತ್ತು ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ಎಸ್​ಎಂ ಕೃಷ್ಣ ಅವರು ಸಿಎಂ ಆಗಿದ್ದಾಗ ಕರ್ನಾಟಕಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ.

ಇವರು ಸಿಎಂ ಆಗಿದ್ದ ವೇಳೆ ರಾಜ್ಯದಲ್ಲಿ ಎರಡು ಘಟನೆಗಳು ದೊಡ್ಡ ಮಟ್ಟದ ಚರ್ಚೆ ಉಂಟಾಯಿತು. ಡಾ. ರಾಜ್‌ಕುಮಾರ್ ಅವರನ್ನು ವೀರಪ್ಪನ್ ಮೂರು ತಿಂಗಳ ಕಾಲ ಅಪಹರಣ ಮಾಡಿದ್ದ. ಆಗ ರಾಜ್ಯದ್ಯಾಂತ ಸರಕಾರದ ವಿರುದ್ಧ ಹೋರಾಟಗಳು ನಡೆದವು. ಬಳಿಕ ಕೃಷ್ಣ ಅವರು ಅಂದಿನ ತಮಿಳುನಾಡು ಸಿಎಂ ಜಯಲಲಿತ ಅವರೊಂದಿಗೆ ಮಾತುಕತೆ ನಡೆಸಿ, ಬಳಿಕ ವೀರಪ್ಪನ್ ಸಂಪರ್ಕ ಮಾಡಿ ರಾಜ್‌ಕುಮಾರ್ ಅವರನ್ನು ಕ್ಷೇಮವಾಗಿ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಬರಗಾಲದ ಸಂದರ್ಭದಲ್ಲಿ ವೈಜ್ಞಾನಿಕವಾಗಿ ಮೋಡ ಬಿತ್ತನೆ ಮಾಡಿದ್ದರು. ಆದರೆ ಆ ಯೋಜನೆ ಯಶಸ್ವಿಯಾಗಿರಲಿಲ್ಲ. ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿದ್ದು, ಸರಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ, ಯಶಸ್ವಿನಿ ಯೋಜನೆ, ಬೆಂ-ಮೈ ಹೆದ್ದಾರಿ, ಬೆಂಗಳೂರನ್ನು ಸಿಲಿಕಾನ್ ಸಿಟಿಯನ್ನಾಗಿ ಮಾಡಿದ್ದು, ಐಟಿ ಬಿಟಿಯಲ್ಲಿ ಬಹುದೊಡ್ಡ ಕ್ರಾಂತಿ ಸೇರಿದಂತೆ ಇನ್ನೂ ಹತ್ತಾರು ಅಭಿವೃದ್ಧಿ ಕೆಲಸಗಳು ಇವರ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೊಂಡಿವೆ.

ಕೆಪಿಸಿಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕೈಗೊಂಡ ಪಾಂಚಜನ್ಯ ಯಾತ್ರೆ ಕರ್ನಾಟಕದ ಕಾಂಗ್ರೆಸ್‌ ಪಕ್ಷಕ್ಕೆ ಹೊಸ ಚೈತನ್ಯವನ್ನು ತುಂಬಿತ್ತು. ಸಕ್ರೀಯ ರಾಜಕಾರಣದಿಂದ ದೂರವಾದ ನಂತರ ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇನ್ನು ಪ್ರಧಾನಿ ಮನಮೋಹನ್‌ ಸಿಂಗ್‌ ಸಂಪುಟದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2017 ರಲ್ಲಿ ಕಾಂಗ್ರೆಸ್‌ ಪಕ್ಷವನ್ನು ತೊರೆದ ಎಸ್ಎಂ ಕೃಷ್ಣ ಅವರು ಬಿಜೆಪಿ ಪಕ್ಷವನ್ನು ಸೇರ್ಪಡೆ ಆಗಿದ್ದರು. ಆದರೆ ಅನಾರೋಗ್ಯ ಕಾರಣದಿಂದ ಅವರು ಬಿಜೆಪಿಯಲ್ಲಿ ಉನ್ನತ ಹುದ್ದೆಯನ್ನು ಪಡೆದಿರಲಿಲ್ಲ. ಅಷ್ಟೇ ಅಲಲ್ದೇ ಕಳೆದ ವರ್ಷ ಅವರು ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು.





 

About Mallikarjun

Check Also

ಉಳೆನೂರು ಗ್ರಾಮದ ಬಸ್ ನಿಲ್ದಾಣದ ಬಳಿ ಎಐಡಿಎಸ್ಓ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ.

Signature collection campaign led by AIDSSO near the bus stand in Ulenur village. ಸಂಯೋಜನೆ ಹೆಸರಿನಲ್ಲಿ …

Leave a Reply

Your email address will not be published. Required fields are marked *