Progress review meeting with district and taluk level officials

ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನಗೊಳಿಸಿ
ರಾಯಚೂರು ಫೆ 17 (ಕರ್ನಾಟಕ ವಾರ್ತೆ): ಜಿಲ್ಲೆಯ ಎಲ್ಲಾ ಖಾಸಗಿ ಹಾಗೂ ಸರಕಾರಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016ಅನ್ನು ಕಡ್ಡಾಯ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಕೆ.ನಾಗನಗೌಡ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಫೆ.17ರ ಸೋಮವಾರ ದಂದು ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಶಾಲಾ ವಾಹನಗಳ ಅಪಘಾತ ಪ್ರಕರಣಗಳು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು, ಹಾಗೂ ಇತರೆ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳು ವರದಿ ಆಗುತ್ತಿದ್ದು, ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಕೈಗೊಂಡು ಆಯೋಗಕ್ಕೆ ವರದಿ ಸಲ್ಲಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಶಾಲೆಗಳು ವಸತಿ ನಿಲಯಗಳಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಮಕ್ಕಳ ರಕ್ಷಣೆಯನ್ನು ಖಾತ್ರಿಪಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಪ್ರತಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ಮಕ್ಕಳ ಸಹಾಯವಾಣಿ ಮತ್ತು ಪೊಲೀಸ್ ಸಹಾಯವಾಣಿಯನ್ನು ಕಡ್ಡಾಯವಾಗಿ ಬರೆಸಬೇಕು. ಹಾಗೂ ಮಕ್ಕಳ ಸುರಕ್ಷತಾ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಮಕ್ಕಳ ಸುರಕ್ಷತಾ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯ ತೋರಿದಲ್ಲಿ ಅಂತಹ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಎಚ್ಚರಿಸಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಶಾಲಾ ವಾಹನಗಳ ಸುರಕ್ಷತೆಯನ್ನು ಕಾಲ-ಕಾಲಕ್ಕೆ ಪರಿಶೀಲನೆ ನಡೆಸಬೇಕು. ಗ್ರಾಮಿಣ ಪ್ರದೇಶದಲ್ಲಿ ಬಸ್ ವ್ಯವಸ್ಥೆ ಇಲ್ಲದ ಕಡೆ ಮಕ್ಕಳು ನಡೆದುಕೊಂಡು ಹೋಗುತ್ತಾರೆ. ಅಂತಹ ಕಡೆ ಕೂಡಲೇ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಸೂಚಿಸಿದರು. ಇತ್ತೀಚಿನ ದಿನಗಳಲ್ಲಿ ಗರ್ಭಿಣಿ ಮತ್ತು ಬಾಣಂತಿಯರ ಸಾವುಗಳು ಸಂಭವಿಸುತ್ತಿದ್ದು, ಅದನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಪುಟ್ಟಮಾದಯ್ಯ ಅವರು ಮಾತನಾಡಿ, ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಹಕಾರ ಬೇಕಾದಲ್ಲಿ ಅಗತ್ಯ ಸಹಕಾರ ನೀಡಲು ಪೊಲೀಸ್ ಇಲಾಖೆ ಸದಾ ಸಿದ್ದ ಇರುತ್ತದೆ. ಯಾವುದೇ ಇಲಾಖೆಯ ಅಧಿಕಾರಿಗಳು ಅಗತ್ಯವಿದ್ದರೆ ನೇರವಾಗಿ ಮಾತನಾಡಿ ಗಮನಕ್ಕೆ ತರಬಹುದು ಎಂದರು.
ಇದೇ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಹರೀಶ್, ಮಕ್ಕಳ ವಿಶೇಷ ಪೊಲೀಸ್ ಘಟಕದ ಡಿವೈಎಸ್ಪಿ ಸತ್ಯನಾರಾಯಣ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅಮರೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.