ಕೊಪ್ಪಳತುಂಗಭದ್ರಾ ಜಲಾಶಯದ ಕ್ರಸ್ಟ್ ಕೊಪ್ಪಳಗೇಟ್ಗಳ ದುರಸ್ಥಿಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
Action to repair the crust gates of Tungabhadra reservoir: Chief Minister Siddaramaiah
ಕೊಪ್ಪಳ ಸೆಪ್ಟೆಂಬರ್ 06 (ಕರ್ನಾಟಕ ವಾರ್ತೆ): ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳ ರೈತರ ಜೀವ ನಾಡಿಯಾಗಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ಗಳ ದುರಸ್ಥಿಗೆ ನಮ್ಮ ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹೇಳಿದರು.
ಅವರು ಶನಿವಾರ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಹತ್ತಿರದ ಎಂ.ಎಸ್.ಪಿ.ಎಲ್ ಏರ್ಸ್ಟ್ರಿಪ್ಗೆ ಭೇಟಿ ನೀಡಿ, ಪೊಲೀಸ್ ಗೌರ ಸ್ವೀಕರಿಸಿ, ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದರು.
ಕಳೆದ ವರ್ಷ ಕೊಚ್ಚಿ ಹೋಗಿದ್ದ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಸಂಖ್ಯೆ 19ಕ್ಕೆ ಸ್ಟಾಪ್ ಲಾಗ್ ಎಲಿಮೆಂಟ್ನ್ನು ಯಶಸ್ವಿಯಾಗಿ ಅಳವಡಿಸಲಾಯಿತು. ಇದಕ್ಕೆ ನಮ್ಮ ಸರ್ಕಾರವು ತ್ವರಿತವಾಗಿ ಸ್ಪಂದನೆ ನೀಡಿತ್ತು. ಪ್ರಸ್ತುತ ತುಂಗಭದ್ರಾ ಜಲಾಶಯವು ಹಳೆಯದಾಗಿದ್ದು, ಗೇಟ್ಗಳ ಸಮಸ್ಯೆಯೂ ಇದೆ. ಮಳೆ ಕಡಿಮೆಯಾದ ತಕ್ಷಣ ಜಲಾಶಯದ ಗೇಟ್ಗಳ ದುರಸ್ಥಿಯನ್ನು ಮಾಡಲಾಗುವುದು ಎಂದರು.
ನಮ್ಮ ಸರ್ಕಾರ ಜನಪರ ಸರ್ಕಾರವಾಗಿದ್ದು, ಜನರ ಅಭಿಪ್ರಾಯಗಳಿಗೆ ಅನುಗುಣವಾಗಿ ಕೆಲಸ ಮಾಡುತ್ತಿದ್ದೇವೆ. ಕೊಪ್ಪಳ ಜಿಲ್ಲೆಯಲ್ಲಿಯ ವಿವಿಧ ಅಭಿವೃದ್ಧಿ ಕೆಲಸ ಕಾರ್ಯಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗಳ ಕಾರ್ಯಕ್ರಮಗಳ ದಿನಾಂಕವನ್ನು ನಿಗದಿಪಡಿಸಿ, ಅವುಗಳ ಉದ್ಘಾಟನೆಯನ್ನು ನೆರವೇರಿಸಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.
*ವಾರ್ತಾ ಇಲಾಖೆಗೆ ಹೊಸ ಪ್ರೇಸ್ ವಾಹನ:* ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರೇಸ್ (ಪತ್ರಿಕಾ) ವಾಹನವು ತುಂಬಾ ಹಳೇಯದಾಗಿದ್ದು, ಇಲಾಖೆಗೆ ಹೊಸ ಬಸ್ ನೀಡುವಂತೆ ಮಾಧ್ಯಮ ಪ್ರತಿನಿಧಿಗಳು ಮುಖ್ಯಮಂತ್ರಿಗಳ ಬಳಿ ಕೇಳಿಕೊಂಡಾಗ, ಕೊಪ್ಪಳ ವಾರ್ತಾ ಇಲಾಖೆಗೆ ಶೀಘ್ರ ಹೊಸ ಪ್ರೇಸ್ ವಾಹನ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ತುಂಗಭದ್ರಾ ಜಲಾಶಯ ಕುರಿತು ಚರ್ಚಿಸಲು ಆಂದ್ರಾ ರಾಜ್ಯದ ಮುಖ್ಯಮಂತ್ರಿಗಳಿಗೆ ಸಮಯ ಕೇಳಿದ್ದೇನೆ. ಸಮಯ ನಿಗದಿಯಾದ ನಂತರ ನವಲಿ ಸಮನಾಂತರ ಜಲಾಶ ಮತ್ತು ಇತರೆ ವಿಷಗಳನ್ನು ಪ್ರಸ್ತಾಪಿಸಲಾಗುವುದು. ಆದಷ್ಟು ಬೇಗನೆ ತುಂಗಭದ್ರ ಗೇಟ್ಗಳ ದುರಸ್ಥಿ ಕೆಲಸಗಳನ್ನು ಮಾಡಲಾಗುವುದು. ಸಾರ್ವಜನಿಕರು ನಮಗೆ ಸಹಕಾರ ನೀಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಎಂ.ಬಿ ಪಾಟೀಲ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್, ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ಹೊಸಪೇಟೆ ಶಾಸಕರಾದ ಹೆಚ್.ಆರ್ ಗವಿಯಪ್ಪ, ಮಾಜಿ ಸಂಸದರಾದ ಕರಡಿ ಸಂಗಣ್ಣ, ಮಾಜಿ ಶಾಸಕರಾದ ಬಸವರಾಜ ಹಿಟ್ನಾಳ್, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಬಳ್ಳಾರಿ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾದ ವರ್ತಿಕಾ ಕಟಿಯಾರ್, ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.