ನಗರ & ಗ್ರಾಮೀಣ ಅಭಿವೃದ್ಧಿಗೆ ಕರಡು ಸಮಗ್ರ ಕ್ರಿಯಾ ಯೋಜನೆ ಸಿದ್ಧ – ಶಾಸಕ ಕೆ.ರಾಘವೇಂದ್ರ ಹಿಟ್ನಾಳ

Mallikarjun
2 Min Read
ಜಾಹೀರಾತು
ನಗರ & ಗ್ರಾಮೀಣ ಅಭಿವೃದ್ಧಿಗೆ ಕರಡು ಸಮಗ್ರ ಕ್ರಿಯಾ ಯೋಜನೆ ಸಿದ್ಧ – ಶಾಸಕ ಕೆ.ರಾಘವೇಂದ್ರ ಹಿಟ್ನಾಳ
Draft comprehensive action plan for urban & rural development ready - MLA K. Raghavendra Hitnal
ಕೊಪ್ಪಳ ಡಿಸೆಂಬರ್ 01 (ಕರ್ನಾಟಕ ವಾರ್ತೆ): ಕೇಂದ್ರ ಮತ್ತು ರಾಜ್ಯ ಸರಕಾರ ಎಲ್ಲ ಇಲಾಖೆಗಳ ಅನುದಾನ ಒಳಗೊಂಡಂತೆ ನಗರ ಮತ್ತು ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿ ಮುನ್ನೋಟ ತಯಾರಿಸಲು ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಮಹತ್ವ ಪಡೆಯುತ್ತದೆ ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.
ಅವರು ಸೋಮವಾರ ಕೊಪ್ಪಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ (ಟಿಪಿಡಿಸಿ) ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಗ್ರಾಮ ಸ್ವರಾಜ್ ಕಲ್ಪನೆಯಂತೆ ಹಳ್ಳಿಯಿಂದ ಯೋಜನೆ ರೂಪುಗೊಳ್ಳಲು ವಾರ್ಡ್ ಸಭೆ ಮತ್ತು ಗ್ರಾಮಸಭೆಗಳು ಪೂರಕವಾಗಿದ್ದು, ಅಧಿಕಾರಿಗಳು ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಗ್ರಾಮಸಭೆಯಲ್ಲಿ ಬಂದ ಕಾಮಗಾರಿಗಳ ಪ್ರಸ್ತಾವನೆಯನ್ನು ತಾಲೂಕ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಚರ್ಚಿಸಿ ಜಿಲ್ಲಾ ಸಮಿತಿಗೆ ಕಳುಹಿಸಲಾಗುವುದು. ಈಗಾಗಲೇ 2026-27ನೇ ಸಾಲಿನ 468 ಕೋಟಿ ರೂ. ಮೊತ್ತದ ಕಾಮಗಾರಿಗಳ ಪ್ರಸ್ತಾವನೆ ತಯಾರಿಸಿದ್ದು, ಸಭೆಯಲ್ಲಿ ಚರ್ಚಿಸಿ ಆದ್ಯತೀಕರಿಸಿ ಜಿಲ್ಲಾ ಸಮಿತಿಗೆ ಅನುಮೋದನೆಗೆ ಕಳುಹಿಸಲಾಗುವುದು ಎಂದರು.
ಅಧಿಕಾರಿಗಳು ಮುಂಬರುವ ಆರ್ಥಿಕ ಸಾಲಿನಲ್ಲಿ ಅನುಮೋದನೆಗೊಂಡ ಕಾಮಗಾರಿ ಅನುಷ್ಠಾನದಲ್ಲಿ ಯಾವುದೇ ವಿಳಂಬ ದೋರಣೆ ಮಾಡದೇ ಕಾಮಗಾರಿಗಳ ಅನುಷ್ಠಾನ ಮಾಡಬೇಕು. ಯಾವುದೇ ಅನುದಾನ ವಾಪಸ್ ಹೋಗದಂತೆ ಕಾರ್ಯನಿರ್ವಹಿಸಬೇಕು ಎಂದು ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಅವರು ಮಾತನಾಡಿ, ಗ್ರಾಮೀಣ ಮತ್ತು ನಗರದ ಸರ್ವತೋಮುಖ ಅಭಿವೃದ್ಧಿಗೆ ಅಭಿವೃದ್ಧಿ ಸಮಿತಿ ನೆರವಾಗಿದ್ದು, ವಿವಿಧ ಇಲಾಖೆಗಳ ಅನುದಾನ ಮತ್ತು ಕೇಂದ್ರ, ರಾಜ್ಯ ಸರಕಾರದ ಅನುದಾನ ಒಳಗೊಂಡಂತೆ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. 2026-27ನೇ ಸಾಲಿನಲ್ಲಿ ಅನುಮೋದನೆಗೊಂಡ ಕಾಮಗಾರಿಗಳನ್ನು ಅನುಷ್ಠಾನ ಮಾಡಲಾಗುವುದು. ತಳಮಟ್ಟದಿಂದ ಯೋಜನೆ ತಯಾರಿಸಲು ಹಾಗೂ ಜನರ ಸಮಸ್ಯೆ ಬಗೆಹರಿಸಲು ಸಹಾಯಕವಾಗಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ರಾಮಣ್ಣ ಕಲ್ಲಣ್ಣನವರ, ಕ್ಷೇತ್ರ ಶಿಕ್ಷಣಾಧಿಕಾರಿ ಹನಮಂತಪ್ಪ, ತಾ.ಪಂ ಸಹಾಯಕ ಲೆಕ್ಕಾಧಿಕಾರಿ ರವಿಕುಮಾರ, ತಾಲೂಕ ಯೋಜನಾಧಿಕಾರಿ ರಾಜೇಸಾಬ ನದಾಫ್, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್, ತಾಲೂಕ ಮಟ್ಟದ ಅಧಿಕಾರಿಗಳು, ಕೊಪ್ಪಳ ನಗರಸಭೆ ಮತ್ತು ಭಾಗ್ಯನಗರ ಪಟ್ಟಣ ಪಂಚಾಯತಿ ಅಧಿಕಾರಿಗಳು, ಆಯ್ದ ಗ್ರಾಮ ಪಂಚಾಯತಗಳ ಅಧ್ಯಕ್ಷರುಗಳು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ತಾಲೂಕ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Total Views: 0
Share This Article