
Special emphasis on increasing SSLC results of students in hostels – Deputy Commissioner Dr. Suresh Itnal


ಕೊಪ್ಪಳ ಜನವರಿ 13 (ಕರ್ನಾಟಕ ವಾರ್ತೆ): ಜಿಲ್ಲೆಯ ವಸತಿ ನಿಲಯಗಳ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಳಕ್ಕೆ ವಾರ್ಡನ್ಗಳು ವಿಶೇಷ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಸೋಮವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ಪೂರ್ವ ವಸತಿ ನಿಲಯಗಳ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ವಿನೂತನ ಕಾರ್ಯಕ್ರಮ `ಸ್ಪೂರ್ತಿ ನಡೆ’ ಹಮ್ಮಿಕೊಳ್ಳುವ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಸುತ್ತಿರುವ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ 82 ಮೆಟ್ರಿಕ್ ಪೂರ್ವ ವಸತಿ ನಿಲಯಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಮುಂಬರುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಲು `ಸ್ಪೂರ್ತಿ ನಡೆ’ ವಿನೂತನ ಕಾರ್ಯಕ್ರಮದಡಿ ಪ್ರತಿನಿತ್ಯ ಎಲ್ಲಾ ಹಾಸ್ಟೆಲ್ಗಳಲ್ಲಿ ಸಂಜೆ 6 ರಿಂದ ರಾತ್ರಿ 8 ಗಂಟೆಯವರೆಗೆ ಉಚಿತ ವಿಶೇಷ ವರ್ಗ (ಕ್ಲಾಸ್)ಗಳನ್ನು ಆನ್ಲೈನ್ ಮುಖಾಂತರ ಆಯೋಜಿಸಿ, ನುರಿತ ಅನುಭವಿ ಶಿಕ್ಷಕರಿಂದ ಬೋಧನೆ ಮಾಡಿಸಬೇಕು. ವಿದ್ಯಾರ್ಥಿಗಳಿಗೆ ಕಠಿಣವೆನಿಸುವ ವಿಷಯಗಳ ಬಗ್ಗೆ ಈ ತರಗತಿಯ ಕೊನೆಯಲ್ಲಿ ನೇರವಾಗಿ ಪ್ರಶ್ನೆಗಳನ್ನು ಕೇಳಲು ಮತ್ತು ಅವುಗಳಿಗೆ ಉತ್ತರ ಒದಗಿಸಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸಲು ಅನುಕೂಲ ಮಾಡಿಕೊಡಬೇಕು. ಈ ಹಿನ್ನೆಲೆಯಲ್ಲಿ ವಸತಿ ಶಿಕ್ಷಣ ಇಲಾಖೆಗಳ ಅಧಿಕಾರಿಗಳು, ಆಯಾ ವಸತಿ ನಿಲಯಗಳ ನಿಲಯಪಾಲಕರು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ವಸತಿ ನಿಲಯಗಳಲ್ಲಿ ಪ್ರತಿ ದಿನ ಗೂಗಲ್ ಮೀಟ್ ಅಥವಾ ಆನ್ಲೈನ್ ಮೂಲಕ ಹೆಚ್ಚುವರಿ ತರಗತಿಯನ್ನು ತೆಗೆದುಕೊಳ್ಳಲು ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ವಿಷಯಗಳ ನುರಿತ ಶಿಕ್ಷಕರಿಗೆ ಸರ್ಕಾರದಿಂದ ಪ್ರತಿ ದಿನಕ್ಕೆ 300 ರೂ.ಗಳನ್ನು ಗೌರವಧನ ನೀಡಲಾಗುತ್ತಿದ್ದು, ಇದಕ್ಕಾಗಿ ಜಿಲ್ಲೆಯ ಎಲ್ಲಾ ಮೆಟ್ರಿಕ್ ಪೂರ್ವ ವಸತಿ ನಿಲಯಗಳ ವಾರ್ಡನ್ಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಕಾರದೊಂದಿಗೆ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗಾಗಿ ಉಚಿತ ವಿಶೇಷ ವರ್ಗಳನ್ನು ಹಮ್ಮಿಕೊಳ್ಳಬೇಕು. `ಸ್ಪೂರ್ತಿ ನಡೆ’ ವಿನೂತನ ಕಾರ್ಯಕ್ರಮವನ್ನು ಸದ್ಬಳಕೆ ಮಾಡಿಕೊಂಡು ಜಿಲ್ಲೆಯ ಎಲ್ಲಾ ವಸತಿ ನಿಲಯಗಳಲ್ಲಿರುವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುವಂತಾಗಬೇಕು. ಯಾವುದೇ ಒಬ್ಬ ವಿದ್ಯಾರ್ಥಿಗಳು ಅನುತ್ತೀರ್ಣರಾಗದಂತೆ ಆಯಾ ವಸತಿ ನಿಲಯಗಳ ವಾರ್ಡನ್ಗಳು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ ಅವರು ಮಾತನಾಡಿ, ಈ ಹಿಂದೆ ಪ್ರಥಮ ಹಂತದಲ್ಲಿ ಶೇ. 52ರಷ್ಟು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸಲು ಹಾಸ್ಟೆಲ್ಗಳಲ್ಲಿರುವ ಕಂಪ್ಯೂಟರ್ಗಳನ್ನು ಬಳಕೆ ಮಾಡಿಕೊಂಡು, ಅವರಿಗೆ ಆನ್ಲೈನ್ ಮುಖಾಂತರ ಪ್ರಶ್ನೆ ಪತ್ರಿಕೆಗಳ ಮಾದರಿಗಳನ್ನು ಅನುಸರಿ ಪರೀಕ್ಷಾ ಪೂರ್ವ ತಯಾರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ನಾಗಮಣಿ ಹೊಸಮನಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ ಅಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮೆಟ್ರಿಕ್ ಪೂರ್ವ ವಸತಿ ನಿಲಯಗಳ ನಿಲಯಪಾಲಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
****




