
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್
Everyone's role is very important in preventing child marriage - Justice Mahantesh Dargad

ಕೊಪ್ಪಳ ಮಾರ್ಚ್ 02 (ಕರ್ನಾಟಕ ವಾರ್ತೆ): ಬಾಲ್ಯ ವಿವಾಹವು ಶಿಕ್ಷಾರ್ಹ ಅಪರಾಧವಾಗಿದ್ದು, ಇದರಿಂದ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಹಾಗಾಗಿ ಬಾಲ್ಯ ವಿವಾಹ ತಡೆಗಟ್ಟಲು ಎಲ್ಲರ ಪಾತ್ರ ಬಹು ಮುಖ್ಯವಾಗಿದೆ ಎಂದು ಕೊಪ್ಪಳ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ್ ಅವರು ಹೇಳಿದರು.
ಬಾಲ್ಯ ವಿವಾಹ ಮುಕ್ತ ಭಾರತಕ್ಕಾಗಿ ಹಮ್ಮಿಕೊಂಡಿರುವ 100 ದಿನಗಳ ಅಭಿಯಾನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ 1098/112 ಹಾಗೂ ಸ್ಪಂದನ ಆಸೋಶಿಯೇಷನ್ ಇವರುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಮ್ಮಿಕೊಂಡಿದ್ದ ಬಾಲ್ಯವಿವಾಹ ಮುಕ್ತಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳ ಬಾಲ್ಯವು ಅತ್ಯಮೂಲ್ಯವಾದದ್ದು, 18 ವರ್ಷದೊಳಗಿನ ಮಕ್ಕಳಲ್ಲಿ ದೈಹಿಕ, ಮಾನಸಿಕ, ಸಾಮಾಜಿಕ, ಬೌದ್ಧಿಕ ಹಾಗೂ ಶಾರೀರಿಕ ಬೆಳವಣಿಗೆಯು ತೀವ್ರವಾಗಿರುತ್ತದೆ. ಈ ಸಂದರ್ಭದಲ್ಲಿ ಮಕ್ಕಳು ಅವರ ಹಕ್ಕುಗಳನ್ನು ಅನುಭವಿಸುವಂತಹ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ. ಅಪ್ರಾಪ್ತ ವಯಸ್ಸಿನಲ್ಲಿ ಮಕ್ಕಳಿಗೆ ವಿವಾಹವನ್ನು ಮಾಡಿದರೆ ಅವರ ಬೆಳವಣಿಗೆ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತದೆ. ಇದಕ್ಕಾಗಿ ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಮತ್ತು ಕರ್ನಾಟಕ ತಿದ್ದುಪಡಿ-2016ರ ಕಾಯ್ದೆಗಳು ಜಾರಿಯಲ್ಲಿವೆ ಎಂದರು.
ಬಾಲ್ಯ ವಿವಾಹ ಒಂದು ಶಿಕ್ಷಾರ್ಹ ಅಪರಾಧ, ಅದು ಯಾರ ಗಮನಕ್ಕೆ ಬರುತ್ತದೆಯೊ ಅವರು, ಅದನ್ನು ತಡೆಗಟ್ಟುವುದು ಅವರ ಆದ್ಯ ಕರ್ತವ್ಯವಾಗಿದೆ. ಹಾಗಾಗಿ ಬಾಲ್ಯವಿವಾಹವನ್ನು ನೆರವೇರಿಸಿದ, ಪ್ರೋತ್ಸಾಹಿಸಿದ ಮತ್ತು ಪಾಲ್ಗೊಂಡವರಿಗೂ ಸಹ ಜೈಲು ಶಿಕ್ಷೆ ಜೊತೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದ್ದು, ಯಾರು ಸಹ ಬಾಲ್ಯ ವಿವಾಹಗಳಲ್ಲಿ ಭಾಗವಹಿಸಬೇಡಿ ಮತ್ತು ಯಾವುದೇ ರೀತಿಯ ಬಾಲ್ಯವಿವಾಹಗಳಿಗೆ ಅವಕಾಶವನ್ನು ನೀಡಬಾರದು. ಬಾಲ್ಯ ವಿವಾಹ ತಡೆಗಟ್ಟಲು ಸಾರ್ವಜನಿಕರ ಸಹಭಾಗಿತ್ವವೂ ತುಂಬಾ ಅತ್ಯವಶ್ಯಕವಾಗಿದ್ದು, ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕುರಿತು ಜನ ಸಮುದಾಯದಲ್ಲಿ ಅರಿವು ಮೂಡಿಸಬೇಕೆಂದು ಹೇಳಿದರು.
ಬೆಳಗಾವಿಯ ಸ್ಪಂದನ ಆಸೋಶಿಯೇಷನ್ ಸಂಸ್ಥೆಯ ಕಾರ್ಯದರ್ಶಿ ವಿ.ಸುಶೀಲಾ ಅವರು ಮಾತನಾಡಿ, 2024ರ ನವೆಂಬರ್ 27 ರಂದು ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಸಚಿವಾಲಯವು `ಬಾಲ್ಯ ವಿವಾಹ ಮುಕ್ತ ಭಾರತ’ ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದು, ಇದರಿಂದ ಬಾಲ್ಯ ವಿವಾಹಗಳ ಸಂಖ್ಯೆ ತುಂಬಾ ಕಡಿಮೆಯಾಗುತ್ತಾ ಬಂದಿದೆ. 2030ಕ್ಕೆ ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಾಣ ಮಾಡಬೇಕು. ಬಾಲ್ಯ ವಿವಾಹ ಕುರಿತು ಗ್ರಾಮೀಣ ಪ್ರದೇಶದ ಜನರಿಗೆ ಅರಿವು ಮೂಡಿಸಬೇಕು ಎಂಬ ಮುಖ್ಯ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಅಧಿಕಾರಿಗಳು, ಮಕ್ಕಳು, ಸಾರ್ವಜನಿಕರು ಪ್ರತಿಯೊಬ್ಬರು ಸೇರಿ ಬಾಲ್ಯ ವಿವಾಹ ಮುಕ್ತ ಮಾಡುವಲ್ಲಿ ಕೈಜೋಡಿಸಬೇಕು. ಬಾಲ್ಯ ವಿವಾಹ ಮುಕ್ತ ರಥ ವಾಹನವು ಕೊಪ್ಪಳ ಜಿಲ್ಯಾದಂತ ಒಂದು ವಾರ ಸಂಚಾರಿಸಲಿದ್ದು ಸುಮಾರು 50 ರಿಂದ 60 ಹಳ್ಳಿಗಳಲ್ಲಿ ಜಾಗೃತಿ ಮೂಡಿಸಲಿದೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಹೇಮಂತ್ ಕುಮಾರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ. ಕೃಷ್ಣಮೂರ್ತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವಿ.ಬಿ ಅಂಗಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಪಂದನ ಸಂಸ್ಥೆಯ ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




