ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ: ಸಂಪನ್ಮೂಲ ಶಿಕ್ಷಕರಿಗೆ ಸನ್ಮಾನ
Special class for SSLC students: Resource teachers felicitated


ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ: ಸಂಪನ್ಮೂಲ ಶಿಕ್ಷಕರಿಗೆ ಸನ್ಮಾನ

ಕೊಪ್ಪಳ ಮಾರ್ಚ್ 12 (ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಮಹತ್ವಾಕಾಂಕ್ಷೆಯ ಯೋಜನೆಯಾದ `ಸ್ಪೂರ್ತಿಯ ನಡೆ’ ಕಾರ್ಯಕ್ರಮದಡಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ಆನ್ಲೈನ್ ತರಗತಿ ನೀಡಿದ ಸಂಪನ್ಮೂಲ ಶಿಕ್ಷಕರಿಗೆ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಲಾಯಿತು.
“ಸ್ಪೂರ್ತಿಯ ನಡೆ” ಕಾರ್ಯಕ್ರಮವು ಕಳೆದ 2025ರ ಡಿಸೆಂಬರ್ ರಿಂದ ಆರಂಭಗೊಂಡು ಪ್ರಸ್ತುತ ಮುಕ್ತಾಯಗೊಂಡಿದ್ದು, ಸಂಪನ್ಮೂಲ ಶಿಕ್ಷಕರಾಗಿ ಜಿಲ್ಲೆಯ ವಿವಿಧ ಸರ್ಕಾರಿ ಪ್ರೌಢ ಶಾಲೆಗಳ ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ ಶಿಕ್ಷಕರಿಂದ ಮೂರು ತಿಂಗಳ ಕಾಲ ನಿರಂತರವಾಗಿ ಸೋಮವಾರದಿಂದ ಶನಿವಾರವರೆಗೆ ಪ್ರತಿದಿನ ಸಂಜೆ 6 ರಿಂದ ರಾತ್ರಿ 8 ಗಂಟೆಯವರೆಗೆ ಜಿಲ್ಲೆಯ ಎನ್.ಐ.ಸಿ ಕಚೇರಿಯಲ್ಲಿ ತರಗತಿಗಳನ್ನು ನಿರ್ವಹಿಸಲಾಗುತ್ತಿತ್ತು. ಇದಕ್ಕಾಗಿ ಅಗತ್ಯ ಸಹಯೋಗ ನೀಡಿದ ಎನ್.ಐ.ಸಿ ಮುಖ್ಯಸ್ಥರಾದ ಬಸವರಾಜ್ ಮತ್ತು ತರಬೇತಿ ನೀಡಿದ ಎಲ್ಲಾ ಸಂಪನ್ಮೂಲ ಶಿಕ್ಷಕರಿಗೆ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಸೇರಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ನಾಗಮಣಿ ಹೊಸಮನಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ ಅಲಿ, ಯಲಬುರ್ಗಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶಿವಶಂಕರ ಕರಡಕಲ್ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
