Let there be no shortage of fertilizer during the monsoon season - District Collector Dr. Suresh Itnal

ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರದ ಕೊರತೆಯಾಗದಿರಲಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ
ಕೊಪ್ಪಳ ಮಾರ್ಚ್ 27 (ಕರ್ನಾಟಕ ವಾರ್ತೆ): ಜಿಲ್ಲೆಯ 2026ರ ಮುಂಗಾರು ಹಂಗಾಮಿನಲ್ಲಿ ಅವಶ್ಯವಿರುವ ರಸಗೊಬ್ಬರಕ್ಕೆ ಯಾವುದೇ ರೀತಿಯ ಕೊರತೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ರಸಗೊಬ್ಬರಗಳ ಸಮರ್ಪಕ ಸರಬರಾಜು ಮತ್ತು ನಿರ್ವಹಣೆ ಕುರಿತು ಕರೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
2025ರ ಮುಂಗಾರು ಹಂಗಾಮಿನಲ್ಲಿ ಹಲವು ಸವಾಲುಗಳ ನಡುವೆಯೂ ಜಿಲ್ಲೆಯಲ್ಲಿ ರಸಗೊಬ್ಬರ ವಿತರಣೆ ಸಮರ್ಪಕವಾಗಿ ನಿರ್ವಹಿಸಿರುವುದು ಶ್ಲಾಘನೀಯವಾಗಿದೆ. ಆದರೆ, ಪ್ರಸಕ್ತ ಇರಾನ್ ಸೇರಿದಂತೆ ವಿವಿಧ ದೇಶಗಳ ನಡುವಿನ ಯುದ್ಧ ಪರಿಸ್ಥಿತಿಯಿಂದ ರಸಗೊಬ್ಬರ ಉತ್ಪಾದನೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ಹಾಗೂ ರಸಗೊಬ್ಬರಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದ್ದು, ಇದರಿಂದ 2026ರ ಮುಂಗಾರು ಹಂಗಾಮಿನಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾಗಿ ಇದಕ್ಕಾಗಿ ಪೂರ್ವ ತಯಾರಿ ಮಾಡಿಕೊಳ್ಳುವುದು ಅತ್ಯವಶ್ಯಕವಾಗಿದೆ. ರೈತರಿಗೆ ಉತ್ತಮ ಗುಣಮಟ್ಟದ ರಸಗೊಬ್ಬರಗಳನ್ನು ಸಕಾಲದಲ್ಲಿ ಹಾಗೂ ಸಮರ್ಪಕವಾಗಿ ದೊರಕುವಂತೆ ಮಾಡುವುದು ಸರ್ಕಾರದ ಪ್ರಮುಖ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಯಾವುದೇ ನಿರ್ಲಕ್ಷ್ಯ ನಡೆಯಬಾರದು ಎಂದು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಹಾಯಧನದ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆಯಾಗುವುದನ್ನು ತಡೆಯಲು ಕಾರ್ಖಾನೆಗಳು ಹಾಗೂ ಕೈಗಾರಿಕೆಗಳನ್ನು ಗುರುತಿಸಿ ಮಿಷನ್ ಮೋಡ್ನಲ್ಲಿ ಪರಿಶೀಲನೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಪ್ರತಿ 15 ದಿನಗಳಿಗೊಮ್ಮೆ ಪರಿಶೀಲನಾ ಸಭೆ ನಡೆಸಬೇಕು. ಜಿಲ್ಲೆಯಲ್ಲಿ ತೀವ್ರ ಬೇಡಿಕೆ ಎದುರಾದ ಸಂದರ್ಭದಲ್ಲಿ ಬಳಕೆಗಾಗಿ ಶೇ.25ರಷ್ಟು ರಸಗೊಬ್ಬರವನ್ನು ಕಾಪು ದಾಸ್ತಾನು ಇಡುವ ಕ್ರಮವನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಯೂರಿಯಾ ರಸಗೊಬ್ಬರಕ್ಕೆ ಸರ್ಕಾರದಿಂದ ಹೆಚ್ಚಿನ ಸಬ್ಸಿಡಿ ನೀಡಲಾಗುತ್ತಿರುವ ಹಿನ್ನೆಲೆ, ಟಾಪ್(Top)-20/40 ದೊಡ್ಡ ಖರೀದಿದಾರರ ವಿವರಗಳನ್ನು ಪ್ರತಿ ತಿಂಗಳು ಪರಿಶೀಲಿಸಿ ಐಎಫ್ಎಂಎಸ್ ವೆಬ್ಸೈಟ್ನಲ್ಲಿ ದಾಖಲಿಸಲು ತಿಳಿಸಿದರು.
ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟವಾಗದಂತೆ ಕಠಿಣ ಕ್ರಮ ಕೈಗೊಳ್ಳಬೇಕು. ಚಿಲ್ಲರೆ ಮಾರಾಟಗಾರರು ಪೊಸ್ (PoS) ಯಂತ್ರದ ಮೂಲಕ ತಕ್ಷಣದ ಮಾರಾಟ ದಾಖಲಿಸದಿದ್ದಲ್ಲಿ, ಭೌತಿಕ ಮತ್ತು ಆನ್ಲೈನ್ ದಾಸ್ತಾನು ನಡುವೆ ವ್ಯತ್ಯಾಸ ಉಂಟಾಗಿ ಸರಬರಾಜು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಈ ಬಗ್ಗೆ ತೀವ್ರ ನಿಗಾವಹಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. “ಧರ್ತಿ ಮಾತಾ ಬಚಾವೋ” ನಿಗ್ರಾಣಿ ಸಮಿತಿಗಳನ್ನು ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಚುರುಕುಗೊಳಿಸಿ, ಸಮಗ್ರ ರಸಗೊಬ್ಬರ ಬಳಕೆ ಹಾಗೂ ಪರ್ಯಾಯ ಗೊಬ್ಬರಗಳ ಉತ್ತೇಜನಕ್ಕೆ ಕ್ರಮ ವಹಿಸಬೇಕು ಎಂದು ಹೇಳಿದರು.
ಮುಂಗಾರು ಹಂಗಾಮು ಆರಂಭಕ್ಕೂ ಮುನ್ನ ಮತ್ತು ಮುಂಗಾರು ಹಂಗಾಮಿನ ಅವಧಿಯಲ್ಲಿ ಎಲ್ಲಾ ಸಂಬಂಧಿತ ಪಾಲುದಾರರೊಂದಿಗೆ ಸಭೆಗಳನ್ನು ನಡೆಸಿ, ಯಾವುದೇ ರೀತಿಯ ರಸಗೊಬ್ಬರದ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಒಟ್ಟಾರೆ ಪ್ರಸಕ್ತ ಸವಾಲುಗಳ ನಡುವೆಯೂ ರೈತರಿಗೆ ಯಾವುದೇ ತೊಂದರೆ ಆಗದಂತೆ ಸಕಾಲದಲ್ಲಿ ರಸಗೊಬ್ಬರಗಳನ್ನು ಪೂರೈಸುವಂತೆ ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತ್ ಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿ.ಡಿ ಕೃಷ್ಣಮೂರ್ತಿ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣ ಉಕ್ಕುಂದು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶಿಲ್ದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
