ಕನಕಗಿರಿ ಉತ್ಸವದ ಎಲ್ಲ ಸಮಿತಿಗಳು ಚುರುಕಾಗಿ ಕಾರ್ಯನಿರ್ವಹಿಸಲಿ:ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ನಿರ್ದೇಶನ

H.Mallikarjun
H.Mallikarjun - Kalyanasiri
4 Min Read
ಜಾಹೀರಾತು

All the committees of Kanakagiri Utsav should work diligently: District Magistrate Dr. Suresh B. Itnal's directive

ಕನಕಗಿರಿ ಉತ್ಸವದ ಎಲ್ಲ ಸಮಿತಿಗಳು ಚುರುಕಾಗಿ ಕಾರ್ಯನಿರ್ವಹಿಸಲಿ:
ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ನಿರ್ದೇಶನ

ಜಾಹೀರಾತು


ಕೊಪ್ಪಳ ಮೇ 04 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಐತಿಹಾಸಿಕ ಪುಣ್ಯ ಕ್ಷೇತ್ರವಾದ ಕನಕಗಿರಿಯಲ್ಲಿ ಮೇ 16 ರಿಂದ ಎರಡು ದಿನಗಳ ಕಾಲ ನಿಗದಿಯಾದ ಕನಕಗಿರಿ ಉತ್ಸವ-2026ರ ವಿವಿಧ ಸಮಿತಿಗಳಲ್ಲಿನ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಚುರುಕಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಕನಕಗಿರಿ ಉತ್ಸವ-2026ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೇ 4ರಂದು ಹಮ್ಮಿಕೊಂಡಿದ್ದ ಮತ್ತೊಂದು ಸುತ್ತಿನ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಈ ಮೊದಲು ನಡೆದ ಸಭೆಯಲ್ಲಿ ಸೇರಿದ್ದ 16ಕ್ಕು ಹೆಚ್ಚಿನ ಸಮಿತಿಗಳಲ್ಲಿನ ಅಧಿಕಾರಿಗಳಿಗೆ ಈಗಾಗಲೇ ಬೇರೆ ಬೇರೆ ರೀತಿಯ ಕಾರ್ಯ ಹಂಚಿಕೆ ಮಾಡಿದಂತೆ ಕಾರ್ಯಪೃವೃತ್ತರಾಗಲು ಸೂಚಿಸಲಾಗಿತ್ತು. ಪ್ರಸ್ತುತ ಉತ್ಸವಕ್ಕೆ ಬೆರಳಣಿಯಷ್ಟು ದಿನಗಳು ಮಾತ್ರ ಬಾಕಿಯಿದೆ. ಎಲ್ಲಾ ಸಮಿತಿಗಳು ತಮ್ಮ ಕಾರ್ಯ ನಿರ್ವಹಣೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ವಿಶೇಷ ಒತ್ತು ಕೊಡಬೇಕು. ಮೇಲಿಂದ ಮೇಲೆ ಸಭೆ ನಡೆಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಉತ್ಸವ ಸಂದರ್ಭದಲ್ಲಿ ಕನಕಗಿರಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಬೇಕು. ಮೆರವಣಿಗೆ ಮಾರ್ಗ ಸೇರಿದಂತೆ ಎಲ್ಲಾ ಕಡೆಗೆ ವಿದ್ಯೂದೀಪಾಲಂಕಾರಕ್ಕೆ ವ್ಯವಸ್ಥೆಯಾಗಬೇಕು. ಉತ್ಸವದ ಅಂಗವಾಗಿ ನಡೆಯುವ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಜಾನಪದ ಕಲಾ ತಂಡಗಳ ಆಯ್ಕೆ ಪ್ರಕ್ರಿಯೆ ಬೇಗನೆ ಪೂರ್ಣವಾಗಬೇಕು. ಉತ್ಸವದಲ್ಲಿ ಕಾರ್ಯಕ್ರಮ ನೀಡುವ ಕಲಾವಿದರ ಆಯ್ಕೆ ಪ್ರಕ್ರಿಯೆ ಕೂಡ ಪಾರದರ್ಶಕವಾಗಿ ನಡೆಯಬೇಕು ಎಂದು ಮೆರವಣಿಗೆ ಮತ್ತು ಸಾಂಸ್ಕೃತಿಕ ಸಮಿತಿಗೆ ಸೂಚನೆ ನೀಡಿದರು.
ಕಾರ್ಯಕ್ರಮಕ್ಕೆ ಆಗಮಿಸಲಿರುವ ಗಣ್ಯರು, ಕಲಾವಿದರು, ಪತ್ರಕರ್ತರು, ಅಧಿಕಾರಿಗಳು ಸೇರಿದಂತೆ ಎಲ್ಲ ಆಹ್ವಾನಿತರ ಮಾಹಿತಿ ಪಡೆದು ಅವರಿಗೆ ಕನಕಗಿರಿ ಸೇರಿದಂತೆ ಸುತ್ತಲಿನ ವಿವಿಧೆಡೆ ಸರಿಯಾದ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕರಿಗೆ ಊಟ ಮತ್ತು ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು. ಆಹಾರ ಗುಣಮಟ್ಟದ ಬಗ್ಗೆ ಒತ್ತು ಕೊಡಬೇಕು ಎಂದು ಆಹಾರ ಸಮಿತಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉತ್ಸವದಲ್ಲಿ ಕುಸ್ತಿ, ಕಬ್ಬಡ್ಡಿ ಹಾಗೂ ವಾಲಿಬಾಲ್ ಸೇರಿದಂತೆ ಬೇರೆ ಬೇರೆ ಕ್ರೀಡೆಗಳಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಹೆಸರಾಂತ ಕುಸ್ತಿ ಹಾಗೂ ಕಬಡ್ಡಿ ಪಟುಗಳು ಸೇರುವುದನ್ನು ಖಚಿತಪಡಿಸಿಕೊಂಡು ಅವರ ಪಟ್ಟಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವೇದಿಕೆ ಮತ್ತು ಪೇಂಡಾಲ ನಿರ್ಮಾಣ, ಗ್ರೀನ್ ರೂಮ್, ವೇದಿಕೆಗೆ ಹೂವಿನ ಕುಂಡಗಳ ವ್ಯವಸ್ಥೆ, ಬ್ಯಾರಿಕೇಡಿಂಗ್ ಮತ್ತು ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆಗೆ ಅಗತ್ಯ ಕ್ರಮ ವಹಿಸುವಂತೆ ವೇದಿಕೆ ಸಮಿತಿಗೆ ಸೂಚನೆ ನೀಡಲಾಯಿತು.
ಈ ಬಾರಿ ಉತ್ಸವದಲ್ಲಿ ಕೃಷಿ ಹಾಗೂ ತೋಟಗಾರಿಕಾ ಇಲಾಖೆಯಿಂದ ದೊಡ್ಡ ಮಟ್ಟದಲ್ಲಿ ಪ್ರದರ್ಶನ ಮಳಿಗೆಗಳು ನಿರ್ಮಾಣವಾಗಬೇಕು. ರೇಷ್ಮೆ, ಮೀನುಗಾರಿಕೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆಯಿಂದಲು ಸಹ ಯೋಜನೆಗಳ ಮಾಹಿತಿ ಪ್ರದರ್ಶನ ಮಳಿಗೆಗಳನ್ನು ಅಚ್ಚುಕಟ್ಟಾಗಿ ನಿರ್ಮಿಸಬೇಕು. ಉತ್ಸವದಲ್ಲಿ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಹಾಕಲು ಸಂಜಿವಿನಿ ಮತ್ತು ಎನ್.ಆರ್.ಎಲ್.ಎಂ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.
ಉತ್ಸವದಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಹೆಚ್ಚಿನ ಬಸ್‌ಗಳ ವ್ಯವಸ್ಥೆ ಮಾಡಬೇಕು. ಮೇ 16 ಮತ್ತು 17 ರಂದು ಎರಡು ದಿನಗಳ ಕಾಲ ನಡೆಯುವ ಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬೇರೆ ಬೇರೆ ಸಮಿತಿಗಳು ಮತ್ತು ಪ್ರಚಾರ ಹಾಗೂ ಮಾಧ್ಯಮ ಸಮಿತಿ ಅಗತ್ಯ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ದಿ ಮಾತನಾಡಿ, ಉತ್ಸವಕ್ಕೆ ಆಗಮಿಸುವ ಗಣ್ಯ ವ್ಯಕ್ತಿಗಳು ಹಾಗೂ ಕಲಾವಿದರು ಮತ್ತು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸೂಕ್ತ ಭದ್ರತಾ ವ್ಯವಸ್ಥೆಗೆ ಈಗಿನಿಂದಲೇ ಕ್ರಮ ವಹಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಇನ್ನೀತರ ಸಮಿತಿಗಳಲ್ಲಿನ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಅವರು ಮಾತನಾಡಿ, ಕನಕಗಿರಿ ಉತ್ಸವ ಹಿನ್ನೆಲೆಯಲ್ಲಿ ಕನಕಗಿರಿ, ಕಾರಟಗಿ ಮತ್ತು ಗಂಗಾವತಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಪರಸ್ಪರ ಸಮನ್ವಯದಿಂದ, ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಬೇಕು. ಕನಕಗಿರಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಸಹ ಹಬ್ಬದ ವಾತಾವರಣ ನಿರ್ಮಾಣವಾಗುವಂತೆ ಕನಕಗಿರಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತಗಳ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಕನಕಗಿರಿ ತಾಲೂಕಿನಲ್ಲಿನ ಐತಿಹಾಸಿಕ ಸ್ಥಳಗಳೆಲ್ಲವೂ ಅಲಂಕಾರವಾಗಬೇಕು. ಎಲ್ಲ ಪ್ರಮುಖ ರಸ್ತೆಗಳು ಸುಗಮ ಸಂಚಾರಕ್ಕೆ ಸಿದ್ದವಾಗಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಟಿ.ಕೃಷ್ಣಮೂರ್ತಿ, ಮುಖ್ಯ ಯೋಜನಾಧಿಕಾರಿಗಳಾದ ಡಿ.ಮಂಜುನಾಥ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶರಣೇಗೌಡ ಪಾಟೀಲ್, ಕನಕಗಿರಿ ತಾಲ್ಲೂಕು ಕಸಾಪ ಅಧ್ಯಕ್ಷರಾದ ಮಹೇಬೂಬ್, ಮುಖ್ಯ ಲೆಕ್ಕಾಧಿಕಾರಿಗಳಾದ ಅಮೀನ ಅತ್ತಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿಗಳಾದ ಮಂಜುನಾಥ ಗುಂಡೂರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಜಗದೀಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪನಿರ್ದೇಶಕರಾದ ಸೋಮಶೇಖರಗೌಡ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Total Views: 0
Share This Article