
16th National Voters Day
Voting is not just a right, it is a constitutional duty - Justice Saraswati Devi
16ನೇ ರಾಷ್ಟ್ರೀಯ ಮತದಾರರ ದಿನಾಚರಣೆ
ಮತದಾನ ಕೇವಲ ಹಕ್ಕಲ್ಲ, ಸಂವಿಧಾನಾತ್ಮಕ ಕರ್ತವ್ಯ – ನ್ಯಾ. ಸರಸ್ವತಿ ದೇವಿ


ಕೊಪ್ಪಳ ಜನವರಿ 25 (ಕರ್ನಾಟಕ ವಾರ್ತೆ): ಮತದಾನ ಎಂಬುದು ಕೇವಲ ಹಕ್ಕಲ್ಲ, ಅದು ನಮ್ಮ ಸಂವಿಧಾನಾತ್ಮಕ ಕರ್ತವ್ಯವಾಗಿದೆ ಎಂದು ಕೊಪ್ಪಳದ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಸರಸ್ವತಿ ದೇವಿ ಹೇಳಿದರು.
ಅವರು ಭಾನುವಾರ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಭಾರತ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಕರ್ನಾಟಕ ರಾಜ್ಯ, ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಜಾಪ್ರಭುತ್ವದ ಶಕ್ತಿ ಕಾನೂನು ಮತ್ತು ಜನರ ವಿಶ್ವಾಸದ ಮೇಲೆ ನಿಂತಿದ್ದು, ಆ ವಿಶ್ವಾಸವನ್ನು ಉಳಿಸಿಕೊಳ್ಳುವ ಪ್ರಮುಖ ಸಾಧನವೇ ಮತದಾನ ಆಗಿದೆ. ಹಾಗಾಗಿ ದೇಶದ ಪ್ರತಿಯೊಬ್ಬ ಅರ್ಹ ನಾಗರಿಕನು ಮತದಾನ ಹಕ್ಕನ್ನು ಜವಾಬ್ದಾರಿಯಿಂದ ಬಳಸಬೇಕು. ಮತದಾನ ಪ್ರಕ್ರಿಯೆಯು ಪವಿತ್ರವಾಗಿದ್ದು, ಇದು ನಮಗೆ ಸಂವಿಧಾನ ನೀಡಿದ ಅತ್ಯಂತ ಮಹತ್ವದ ಹಕ್ಕಾಗಿದೆ ಎಂದರು.
ಮಹಿಳೆಯರು, ಯುವಕರು ಹಾಗೂ ಮೊದಲ ಬಾರಿ ಮತದಾನ ಮಾಡುವ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮತದಾನದ ಮೂಲಕವೇ ನ್ಯಾಯ, ಸಮಾನತೆ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಬಲಪಡಿಸಬಹುದು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷೆತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಪಾಯ ಮತದಾನವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡು ತಮ್ಮ ಅಮೂಲ್ಯ ಮತದಾನ ಹಕ್ಕನ್ನು ಜವಾಬ್ದಾರಿಯಿಂದ ಬಳಸಬೇಕು. ಮತದಾನವು ನಮ್ಮ ಸಂವಿಧಾನಾತ್ಮಕ ಕರ್ತವ್ಯ ಆಗಿದೆ. ಯುವಕರು ಹಾಗೂ ಮೊದಲ ಬಾರಿ ಮತದಾನ ಮಾಡುವ ಹೊಸ ಮತದಾರರು ಚುನಾವಣೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಬಲಿಷ್ಠ ಮತ್ತು ಪಾರದರ್ಶಕ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಕರೆ ನೀಡಿದರು.
ಮತದಾರರ ಪಟ್ಟಿಯ ನಿಖರತೆ, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಪ್ರಮುಖ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ಮೂಲಕ ನಿರಂತರವಾಗಿ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಮತದಾರರ ಪ್ರತಿಜ್ಞಾ ವಾಚನವನ್ನು ಕ್ಯಾಪ್ಟನ್ ಮಹೇಶ ಎಸ್ ಮಾಲಗಿತ್ತಿ ಅವರು ಬೋಧನೆ ಮಾಡಿದರು.
ಮತದಾರರ ಜಾಗೃತಿ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿಎಲ್ಓ, ಸುಪರವೈಜರ್, ಇ.ಎಲ್.ಸಿ ಸಂಯೋಜಕರು ಹಾಗೂ ಮಕ್ಕಳ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮತ್ತು ಇತರೆ ಸಾಧಕರಿಗೆ ಸನ್ಮಾನಿಸಲಾಯಿತು. ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್. ದರಗದ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತಕುಮಾರ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೆಶಕ ಜಗದೀಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕ ಸೋಮಶೇಖರಗೌಡ ಪಾಟೀಲ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಾಗಮಣಿ ಹೊಸಮನಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಜಿಲ್ಲಾ ಸ್ವೀಪ್ ಸಮಿತಿಯ ಇತರೆ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.







