
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ನೋಡಿಕೊಳ್ಳಿ- ಸಚಿವ ಶಿವರಾಜ ಎಸ್. ತಂಗಡಗಿ
Ensure that there are no drinking water problems in the district - Minister Shivraj S. Thangadgi

ಕೊಪ್ಪಳ:. ಫೆಬ್ರವರಿ. 23.(ಕರ್ನಾಟಕ ವಾರ್ತೆ):- ಈಗಾಗಲೇ ಬೇಸಿಗೆ ಆರಂಭವಾಗಿರುವುದರಿಂದ ಕೊಪ್ಪಳ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮುಂಜಾಗ್ರತೆವಹಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಹೇಳಿದರು.
ಅವರು ಸೋಮವಾರ ಕೊಪ್ಪಳ ಜಿಲ್ಲಾ ಪಂಚಾಯತ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಅಮೃತ 2.0 ಯೋಜನಾ ಕಾಮಗಾರಿಗಳ ಪ್ರಗತಿ ಮತ್ತು ಜಲಜೀವನ ಮಿಷನ್ ಯೋಜನೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಜಿಲ್ಲೆಯ 7 ತಾಲ್ಲೂಕಿನಲ್ಲಿ ನೀರಿನ ಸಮಸ್ಯೆಗಳಾಗದಂತೆ ನೋಡಿಕೊಳ್ಳಲು ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು. ಜೆಇಗಳು. ಎ. ಡಬ್ಲೂಗಳು ತಮ್ಮ ವ್ಯಾಪ್ತಿಯ ಪಂಚಾಯತಿ- ಪಂಚಾಯತಿಯ ಎಲ್ಲಾ ಕಡೆ ಭೇಟಿ ನೀಡಿ ಎಲ್ಲಿ ನೀರಿನ ಸಮಸ್ಯೆಗಳಾಗಬಹುದು ಎನ್ನುವ ಕುರಿತು ಮುಂಚಿತವಾಗಿ ಮಾಹಿತಿ ಪಡೆಯಬೇಕು. ಸಮಸ್ಯೆಗಳಾದರೆ ಜನ ನಮಗೆ ಕರೆ ಮಾಡುತ್ತಾರೆ ಹಾಗಾಗಿ ಜಿಲ್ಲೆಯ ಯಾವ ಒಂದು ಊರಿನಲ್ಲಿ ನೀರಿನ ಸಮಸ್ಯೆಯಾಗಬಾರದು ಎಂದು ಹೇಳಿದರು.
ಯಾವ ತಾಲೂಕಿನಲ್ಲಿ ನೀರಿನ ಸಮಸ್ಯೆಯಾಗಬಹುದೆಂದು ಗುರುತಿಸಿ ಈಗಿನಿಂದಲೇ ಆಯಾ ತಾಲ್ಲೂಕಿನ ಶಾಸಕರ ಮುಖಾಂತರ ಸಿಇಓ ಅವರಿಗೆ ಮಾಹಿತಿ ನೀಡಿ. ಈ ಕುರಿತು ನಾನು ಬರುವ ಅಧಿವೇಶನದಲ್ಲಿ ಮಾತನಾಡುತ್ತೆನೆ. ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕುಗಳಿಗೆ ಕೃಷ್ಣಾ ನದಿಯಿಂದ ನೀರು ಬರುತ್ತವೆ ಅಲ್ಲಿ ನೀರಿನ ಕಾಮಗಾರಿಗಳು ಸಮರ್ಪಕವಾಗಿ ಆದರೆ ನೀರಿನ ಸಮಸ್ಯೆಗಳೆ ಬರುವದಿಲ್ಲ. ನಮ್ಮ ಜಿಲ್ಲೆಯಲ್ಲಿ ಕುಡಿಯುವ ನೀರಿನ ಎಲ್ಲಾ ಕಾಮಗಾರಿಗಳು ಮುಗಿದರೆ ನೀರಿನ ಸಮಸ್ಯೆ ಇರುವುದಿಲ್ಲ. ಕುಡಿಯುವ ನೀರಿನ ಕೆಲಸ ಮತ್ತು ಕಾಮಗಾರಿಗಳನ್ನು ಅಧಿಕಾರಿಗಳು ಮುತುವರ್ಜಿವಹಿಸಿ ಫಾಲೋ ಮಾಡಬೇಕು. ಕಾಲ ಮಿತಿಯಲ್ಲಿ ಕೆಲಸ ಮಾಡದ ಗುತ್ತಿಗೆದಾರರಿಗೆ ದಂಡ ಹಾಕಬೇಕು. ಇಲ್ಲದಿದ್ದರೆ ಆ ಕೆಲಸವನ್ನು ಸರಿಯಾಗಿ ಮಾಡುವ ಮತ್ತೊಬ್ಬ ಗುತ್ತಿಗೆದಾರರಿಗೆ ಕೊಡಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಭೆಯಲ್ಲಿ ಕರ್ನಾಟಕ ವಿಧಾನಸಭೆ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಪಾಟೀಲ. ಕೊಪ್ಪಳ ಸಂಸದರಾದ ಕೆ. ರಾಜಶೇಖರ ಹಿಟ್ನಾಳ. ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ. ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ. ಸಹಾಯಕ ಆಯುಕ್ತರಾದ ಕ್ಯಾ. ಮಹೇಶ ಮಾಲಗಿತ್ತಿ. ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಟಿ. ಕೃಷ್ಣಮೂರ್ತಿ. ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು. ಎ.ಡಬ್ಲೂ. ಹಾಗೂ ಜೆಇಗಳು ಮತ್ತು ಗುತ್ತಿಗೆದಾರರು ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.




