Rajasekhara Adur who left BJP and joined Congress

ರಾಜ್ಯ ಸರ್ಕಾರ ಸದಾ ಬಡವರು, ಹಿಂದುಳಿದ, ದೀನದಲೀತರ ಉದ್ಧಾರಕ್ಕಾಗಿ ಶ್ರಮಿಸುತ್ತಿದೆ. ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಯಿಂದ ಕೋಟ್ಯಾಂತರ ಜನರ ಬದುಕಿಗೆ ಆಶಾಕಿರಣವಾಗಿದೆ. ಹೀಗಾಗಿ ಕಾಂಗ್ರೆಸ್ ನ ತತ್ವ ಸಿದ್ದಾಂತ ಮತ್ತು ಶಾಸಕ ಕೆ. ರಾಘವೇಂದ್ರ ಹಿಟ್ನಾಳರ ಅಭಿವೃದ್ಧಿ ಮೆಚ್ಚಿ ಕಾಂಗ್ರೆಸ್ ಸೇರಿದ್ದೇನ. ಇನ್ಮುಂದೆ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಲೋಕಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ. ಇನ್ನೂ ನಾಲ್ಕೈದು ದಿನದಲ್ಲಿ ಐವರು ನಗರಸಭೆಯ ಸದಸ್ಯರು ಸಹ ಕಾಂಗ್ರೆಸ್ ಸೇರುತ್ತಾರೆ ಎಂದರು.
ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ, ರಾಜಶೇಖರ ಆಡೂರು ಅವರ ಪಕ್ಷ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಿದೆ. ಕಳೆದ ಆರು ತಿಂಗಳ ಹಿಂದೆಯೇ ಅವರು ಕಾಂಗ್ರೆಸ್ ಸೇರಬೇಕಿತ್ತು. ಕಾಲ ಇಂದು ಕೂಡಿ ಬಂದಿದೆ. ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಮತ್ತು ತತ್ವ ಸಿದ್ದಾಂತ ಮೆಚ್ಚಿ ಯಾರೇ ಬಂದರೂ ಅವರನ್ನು ಗೌರವದಿಂದ ಸ್ವಾಗತಿಸುತ್ತೇವೆ ಎಂದರು.
ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆ ಕುರಿತು ಮಾತನಾಡಿದ ಶಾಸಕರು, ಸಂಗಣ್ಣ ಕರಡಿಯವರು ಕಳೆದ 30 ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರಿಗೆ ಟಿಕೆಟ್ ನೀಡಬೇಕಿತ್ತು ಎಂಬುದು ವೈಯಕ್ತಿಕ ಹೇಳಿಕೆ. ಆದರೆ ಬಿಜೆಪಿ ಅವರಿಗೆ ಟಿಕೆಟ್ ನೀಡಿಲ್ಲ. ಸಂಗಣ್ಣನವರು ಕಾಂಗ್ರೆಸ್ ಸೇರೋ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದರು.
ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ನಮ್ಮೊಂದಿಗೆ ಮುನಿಸಿಕೊಂಡಿಲ್ಲ. ಶುಕ್ರವಾರ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅನ್ಸಾರಿಯವರು ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಮಾತನಾಡಿದ್ದಾರೆ. ನಮ್ಮಲ್ಲಿ ಯಾವುದೇ ಬಣವಿಲ್ಲ. ಕಾರ್ಯಕರ್ತರ ನಡುವೆ ಹೊಂದಾಣಿಕೆ ಕೊರತೆಯಿದ್ದು, ಅದನ್ನು ಸರಿಪಡಿಸಿಕೊಂಡು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ ಎಂದರು.
ಲೋಕಸಭಾ ನಿಯೋಜಿತ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಮಾತನಾಡಿ, ಇಂಡಿಯಾ ಮೈತ್ರಿಕೂಟದ ಗ್ಯಾರಂಟಿ ಘೋಷಣೆ ಜತೆಗೆ ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮ ಮೆಚ್ಚಿ ಅನೇಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ರಾಜಶೇಖರ ಆಡೂರು ಅವರ ಪಕ್ಷ ಸೇರ್ಪಡೆಯಿಂದ ಗೆಲುವಿಗೆ ಅನುಕೂಲವಾಗಲಿದೆ ಎಂದ ಅವರು, ಲೋಕಸಭಾ ಚುನಾವಣೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಆಸೀಫ್ ಅಲಿ, ಪ್ರಸನ್ನ ಗಡಾದ, ಬಾಲಚಂದ್ರ, ಶರಣಪ್ಪ ಸಜ್ಜನ್, ಶಿವಕುಮಾರ್ ಶೆಟ್ಟರ್, ಕೃಷ್ಟ ಇಟ್ಟಂಗಿ, ಕಾಟನ್ ಪಾಷ, ಕೆ.ಎಂ. ಸೈಯ್ಯದ್, ಜ್ಯೋತಿ ಗೊಂಡಬಾಳ, ಮಾನ್ವಿ ಪಾಷ, ಅಕ್ಬರ್ ಪಲ್ಟನ್ ಸೇರಿದಂತೆ ಮತ್ತಿತರರಿದ್ದರು.
ಫೋಟೋ ಕ್ಯಾಪ್ಸನ್: ಕೊಪ್ಪಳದ ವಾರಕಾರ ಓಣಿಯಲ್ಲಿ ನಗರಸಭೆ ಬಿಜೆಪಿ ಸದಸ್ಯ ರಾಜಶೇಖರ ಆಡೂರು ಅವರು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ನೇತೃತ್ವದಲ್ಲಿ ಬಿಜೆಪಿ ತೊರೆದು ಶನಿವಾರ ಕಾಂಗ್ರೆಸ್ ಸೇರ್ಪಡೆಗೊಂಡರು.